ಬೆಂಗಳೂರು, ಜುಲೈ10 : ಬೆಂಗಳೂರು ನಗರದಲ್ಲಿ ಇನ್ಮುಂದೆ ಫುಟ್ಪಾತ್ ಗಳಲ್ಲಿ ವಾಹನ ಪಾರ್ಕಿಂಗ್ ಇಲ್ಲ,ಅನಧಿಕೃತವಾಗಿ ಪಾರ್ಕ್ ಮಾಡಿರುವ ವಾಹನಗಳ ತೆರವು ಕಾರ್ಯಾಚರಣೆಗೆ ಸಚಿವ ಕೃಷ್ಣ ಬೈರೇಗೌಡ ಶುಕ್ರವಾರ ಚಾಲನೆ ನೀಡಿದರು.
ಸಾರ್ವಜನಿಕ ಸ್ಥಳಗಳನ್ನು ಆಕ್ರಮಿಸಿಕೊಂಡಿರುವ ಅನಾಥ ವಾಹನಗಳ ವಿರುದ್ಧ ಬೆಂಗಳೂರು ನಗರಾದ್ಯಂತ BBMP ಭಾರಿ ಕಾರ್ಯಾಚರಣೆ ಆರಂಭಿಸಿದೆ. ಈಗಾಗಲೇ ಪಾದಚಾರಿಗಳಿಗೆ ತೋದರೆ ನೀಡುತ್ತಿದ್ದ ಫುಟ್ ಪಾತ್ಗಳ ಅತಿಕ್ರಮಣವನ್ನು ನಿರ್ದಾಕ್ಷಿಣ್ಯವಾಗಿ ಒಡೆದು ಹಾಕಿದೆ. ಇದೀಗ ಬೇಕಾಬಿಟ್ಟಿ ಫುಟ್ಪಾತ್ಗಳಲ್ಲಿ,ಸಾರ್ವಜನಿಕ ಸ್ಥಳಗಳಲ್ಲಿ ಅಡ್ಡಾದಿಡ್ಡಿ ಪಾರ್ಕಿಂಗ್ ಮಾಡಿರುವ ವಾಹನಗಳ ತೆರವು ಕಾರ್ಯಾಚರಣೆ ಆರಂಭಗೊಂಡಿದೆ.
ಸಾರ್ವಜನಿಕ ಜಾಗವನ್ನು ಅತಿಕ್ರಮಿಸಿ ನಿಲ್ಲಿಸಲಾಗಿದ್ದ ವಾಹನಗಳಿಗೆ ನೋಟಿಸ್ ಅಂಟಿಸುವ ಮೂಲಕ ಸಚಿವ ಕೃಷ್ಣ ಭೈರೇ ಗೌಡ ಅವರು ಈ ಅಭಿಯಾನಕ್ಕೆ ಚಾಲನೆ ನೀಡಿದರು. ಆರಂಭದಲ್ಲಿ ನಗರದ ಕ್ವೀನ್ಸ್ ರಸ್ತೆಯಲ್ಲಿ ಪಾದಚಾರಿ ಮಾರ್ಗದಲ್ಲಿರುವ ವಾಹನಗಳ ತೆರವು ಕಾರ್ಯಾಚರಣೆಗೆ ಸಚಿವ ಕೃಷ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದು, ಅನಾಥ ವಾಹನಗಳಿಗೆ ನೋಟಿಸ್ ಅಂಟಿಸಿದರು.
ಈ ಸಂದರ್ಭದಲ್ಲಿ ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ಶ್ರೀ ರಿಜ್ವಾನ್ ಅರ್ಷದ್, ಸಂಚಾರ ವಿಭಾಗದ ಜಂಟಿ ಪೊಲೀಸ್ ಕಮಿಷನರ್ ಕಾರ್ತಿಕ್ ರೆಡ್ಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಜಂಟಿ ಆಯುಕ್ತ (ಡೆಪ್ಯುಟಿ ಕಮಿಷನರ್) ವೆಂಕಟ ಚಲಪತಿ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.