ಬಂಟ್ವಾಳ, ಜುಲೈ 22 : ಶಾಲಾ ಮಕ್ಕಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಬೃಹತ್ ಗಾತ್ರದ ಮರ ಉರುಳಿ ಬಿದ್ದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲ್ಲೆಟ್ಟಿ ದೈವಸ್ಥಾನದ ಬಳಿ ಬುಧವಾರ ಸಂಜೆ ನಡೆದಿದೆ. ಘಟನೆಯಲ್ಲಿ ಒರ್ವ ವಿದ್ಯಾರ್ಥಿನಿ ಸಾವನ್ನಪ್ಪಿದ್ದು ನಾಲ್ವರು ಗಾಯಗೊಂಡಿದ್ದಾರೆ ಎನ್ನಲಾಗಿದೆ.
ಕಲ್ಲಡ್ಕ ಖಾಸಾಗಿ ಶಾಲೆ ಮುಗಿದ ಬಳಿಕ ವಿದ್ಯಾರ್ಥಿಗಳನ್ನು ಮನೆಗಳಿಗೆ ಕರೆದೊಯ್ಯುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಬಸ್ ಬರಿಮಾರು ಗ್ರಾಮದ ಕಲ್ಲೇಟಿ ಬಳಿಯ ಶ್ರೀ ಕಾನಲ್ತಾಯ ದೈವಸ್ಥಾನದ ರಸ್ತೆ ಬದಿಯಲ್ಲಿ ಸಂಚರಿಸುತ್ತಿದ್ದ ವೇಳೆ, ಇದ್ದಕ್ಕಿದ್ದಂತೆ ಬೃಹತ್ ಮರವೊಂದು ಚಲಿಸುತ್ತಿದ್ದ ಬಸ್ನ ಮೇಲೆಯೇ ಬಿದ್ದಿದೆ. ಮರದ ಭಾರಕ್ಕೆ ಬಸ್ ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ. ಬೃಹತ್ ಮರ ಬಿದ್ದ ಪರಿಣಾಮ ಬಸ್ನಲ್ಲಿದ್ದ ಹಲವು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಕೂಡಲೇ ಸ್ಥಳಕ್ಕೆ ಧಾವಿಸಿ ಬಂದ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ ಮಕ್ಕಳನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಗಾಯಾಳು ವಿದ್ಯಾರ್ಥಿಗಳನ್ನು ಸ್ಥಳೀಯರ ನೆರವಿನಿಂದ ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನಾ ಸ್ಥಳಕ್ಕೆ ಗ್ರಾಮಾಂತರ ಪೊಲೀಸ್ ಠಾಣೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿರಂತರ ಮಳೆ ಹಾಗೂ ಬಿರುಗಾಳಿಯ ಪರಿಣಾಮ ಮರ ಉರುಳಿ ಬಿದ್ದಿರುವ ಸಾಧ್ಯತೆ ಇದೆ ಎನ್ನಲಾಗಿದೆ.ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.