ಮಂಗಳೂರು, ಜುಲೈ 23: ಬಂಟ್ವಾಳದಲ್ಲಿ ಶಾಲಾ ವಾಹನದ ಮೇಲೆ ಮರ ಬಿದ್ದು ಒರ್ವ ಬಾಲಕಿ ಮೃತಪಟ್ಟು ಇತರ ವಿದ್ಯಾರ್ಥಿಗಳಿಗೆ ಗಾಯವಾಗಿರುವ ಘಟನೆಗೆ ಸಚಿವ ಯು ಟಿ. ಖಾದರ್ ಅವರು ತೀವೃಸಂತಾಪ ವ್ಯಕ್ತಪಡಿಸಿದ್ದಾರೆ.
ಬಂಟ್ವಾಳ ತಾಲೂಕಿನ ಬರಿಮಾರು ಸಮೀಪದ ಕಲೆಟ್ಟಿ ಪ್ರದೇಶದಲ್ಲಿ ಖಾಸಗಿ ಶಾಲೆಯ ಬಸ್ಸಿನ ಮೇಲೆ ಮರ ಬಿದ್ದ ಪರಿಣಾಮ ಓರ್ವ ಬಾಲಕಿ ದುರ್ಘಟನೆಯಲ್ಲಿ ಮೃತಪಟ್ಟಿದ್ದು, ಹಲವು ವಿದ್ಯಾರ್ಥಿಗಳು ಗಾಯಗೊಂಡಿರುವ ದುಃಖದ ಘಟನೆಗೆ ಸಂಬಂಧಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಯು.ಟಿ. ಖಾದರ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತ ಬಾಲಕಿಯ ಕುಟುಂಬಕ್ಕೆ ಆಳವಾದ ಸಾಂತ್ವನವನ್ನು ಸೂಚಿಸಿದ್ದಾರೆ.
ಅಮೆರಿಕಾದ ಚಿಕಾಗೋದಲ್ಲಿ ನಡೆಯುತ್ತಿರುವ ಸಮಾರಂಭದಲ್ಲಿ ಭಾಗವಹಿಸಲು ವಿದೇಶ ಪ್ರವಾಸ ಕೈಗೊಂಡಿರುವ ಸಚಿವರು, ಘಟನೆಯ ಕುರಿತು ಮಾಹಿತಿ ತಿಳಿದ ತಕ್ಷಣ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಮೃತರ ಕುಟುಂಬಕ್ಕೆ ಸರ್ಕಾರದ ವತಿಯಿಂದ ತಕ್ಷಣ ಪರಿಹಾರ ನೀಡುವಂತೆ ಸೂಚಿಸಿದ್ದಾರೆ.
ಇದಲ್ಲದೆ, ಘಟನೆಯಲ್ಲಿ ಗಾಯಗೊಂಡ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸಂಪೂರ್ಣ ಚಿಕಿತ್ಸೆ ವ್ಯವಸ್ಥೆಯನ್ನು ಸರಕಾರದ ವತಿಯಿಂದ ಕಲ್ಪಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
